ಗೌರಿಕಾಲುವೆಯಲ್ಲಿ 45 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ
1 min readಚಿಕ್ಕಮಗಳೂರು-ನಗರದ 32 ನೇ ವಾರ್ಡ್ನ ಗೌರಿಕಾಲುವೆ ಬಡಾವಣೆಯಲ್ಲಿ ರೂ 45 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾರ್ಯಕ್ಕೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಂಗಳವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನದಲ್ಲಿ ನಗರದ ಗೌರಿಕಾಲುವೆ ಬಡಾವಣೆ ರಸ್ತೆ ಡಾಂಬರೀಕರಣಗೊಳ್ಳುತ್ತಿದ್ದು, ಅಭಿವೃದ್ಧಿ ಕುರಿತು ಸದಾ ಆಡಳಿತ ಪಕ್ಷವನ್ನು ಟೀಕಿಸುತ್ತಿದ್ದ ವಿಪಕ್ಷಗಳಿಗೆ ಈ ಮೂಲಕ ತಕ್ಕ ಉತ್ತರ ನೀಡಲಾಗಿದೆ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಉದ್ಯಾನವನ ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ನಗರದ ಬಹುತೇಕ ಕಡೆಗಳಲ್ಲಿ ಸಾರ್ವಜನಿಕ ರಸ್ತೆ, ಚರಂಡಿಯನ್ನು ಒತ್ತುವರಿ ಮಾಡಿದ್ದು ಅದನ್ನು ತೆರವುಗೊಳಿಸಲಾಗುತ್ತಿದೆ. ಮತ್ತೊಂದೆಡೆ ಉದ್ಯಾನವನಗಳ ಜಾಗವನ್ನು ಒತ್ತುವರಿ ಮಾಡಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳು ಕೇಳಿಬರುತಿದ್ದು ಯಾವುದೇ ಪ್ರಭಾವಿಗಳಾಗಿದ್ದರೂ ತೆರವುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮಾರ್ಚ್ ತಿಂಗಳಲ್ಲಿ ನಗರಸಭೆ ಬಜೆಟ್ ಮಂಡನೆಯಾಗಲಿದ್ದು, ನಗರದ ಅಭಿವೃದ್ಧಿಗೆ ಪೂರಕವಾಗಿ ರಸ್ತೆ, ಚರಂಡಿ, ವಿದ್ಯುತ್ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ರಾಜ್ಯಕ್ಕೆ ಮಾದರಿಯಾಗುವ ಬಜೆಟ್ ಮಂಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರಸಭೆ ಸದಸ್ಯ ಭವ್ಯಾಮಂಜುನಾಥ್ ಮಾತನಾಡಿ ವಾರ್ಡ್ನಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಆಗಬೇಕಿದ್ದು ಅವುಗಳ ಬಗ್ಗೆ ಅಧ್ಯಕ್ಷರ ಗಮನಕ್ಕೆ ತರಲಾಗಿದೆ, ಈ ಭಾಗದಲ್ಲಿ ಉದ್ಯಾನವನ ನಿರ್ಮಾಣಗೊಳ್ಳಬೇಕು, ಜತೆಗೆ ಆಗಾಗ್ಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದ್ದು ಪರಿಹರಿಸುವಂತೆ ಕೇಳಿಕೊಂಡರು.ಈ ಸಂದರ್ಭದಲ್ಲಿ ಸ್ಥಳೀಯರಾದ ವಿಶಾಲಮ್ಮ, ರತ್ನಮ್ಮ, ಲೀಲಾವತಿ, ರಾಜೇಶ್, ಶೇಖರ್, ಜಮ್ಷೀದ್, ಮಂಜುನಾಥ್, ಮಹೇಶ್, ಹರೀಶ್ ಸೇರಿದಂತೆ ಮತ್ತಿತರರು ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g