ರಸ್ತೆಗಾಗಿ ದಶಕಗಳಿಂದ ಹೋರಾಟ, ಆಸ್ಪತ್ರೆಗೆ ಅವರನ್ನೂ ಜೋಳಿಗೆಯಲ್ಲೇ ಹೊತ್ತೊಯ್ದರು…!
1 min read
85 ವರ್ಷದ ವೃದ್ಧೆಯನ್ನ ಆಸ್ಪತ್ರೆಗೆ ಕೊಂಡೊಯಲು ದಾರಿ ಇಲ್ಲದೆ ಜೋಳಿಗೆಯಲ್ಲಿ ಕಟ್ಟಿಕೊಂಡು ಆಸ್ಪತ್ರೆಗೆ ಕೊಂಡೊಯ್ದಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ. ಗಂಟೆಮಕ್ಕಿ ಗ್ರಾಮದ ವೃದ್ಧೆ ವೆಂಕಟಮ್ಮನವರಿಗೆ ಕಳೆದೊಂದು ವಾರದಿಂದಲೂ ಆರೋಗ್ಯ ಹದಗೆಟ್ಟಿತ್ತು. ಆಸ್ಪತ್ರೆಗೆ ಕರೆದೊಯ್ಯಲು ದಾರಿ ಇಲ್ಲದೆ ಕುಟುಂಬಸ್ಥರು ಮನೆಯಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆರೋಗ್ಯ ತೀವ್ರ ಹದಗೆಟ್ಟಾಗ ಸ್ಥಳೀಯರು ಹಾಗೂ ಸಂಬಂಧಿಕರು ಜೋಳಿಗೆ ಕಟ್ಟಿಕೊಂಡು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ವೃದ್ಧೆ ವೆಂಕಮ್ಮ ಕಳೆದ 65-70 ವರ್ಷಗಳಿಂದಲೂ ಗಂಟೆಮಕ್ಕಿ ಗ್ರಾಮದಲ್ಲೇ ವಾಸವಿದ್ದಾರೆ. ಇಲ್ಲಿ ಸುಮಾರು 8-10 ಮನೆಗಳಿದ್ದು, ಯಾರಿಗೂ ಓಡಾಡಲು ಜಾಗವಿಲ್ಲ. ಜಮೀನಿಗೆ ಹೋಗಲು ದಾರಿ ಇಲ್ಲ. ಹೊಲ-ಗದ್ದೆಗಳಿಗೆ ಗೊಬ್ಬರ, ಮನೆಗೆ ರೇಷನ್ ಎಲ್ಲವನ್ನು ತಲೆ ಮೇಲೆ ಹೊತ್ತುಕೊಂಡು ಹೋಗಬೇಕು. ಸ್ಥಳೀಯರು ಹತ್ತಾರು ವರ್ಷಗಳಿಂದ ರಸ್ತೆ ನಿರ್ಮಿಸಿ ಕೊಡುವಂತೆ ಅಧಿಕಾರಿಗಳಿಗೆ ನೂರಾರು ಮನವಿ ನೀಡಿದ್ದಾರೆ. ಆದರೆ ಈವರೆಗೂ ಯಾರೊಬ್ಬರೂ ಕೂಡ ಇವರ ನೋವಿಗೆ ಸ್ಪಂದಿಸಿಲ್ಲ. ಗ್ರಾಮ ಪಂಚಾಯಿತಿ ಅಧಿಕಾರಿಗಳು, ತಹಸಿಲ್ದಾರ್, ಎಸಿ ಹಾಗೂ ಡಿಸಿಗೂ ಮನವಿ ಸಲ್ಲಿಸಿದ್ದಾರೆ.
ಆದರೆ, ಯಾವುದೇ ಪ್ರಯೋಜನವಾಗಿಲ್ಲ. 2021 ರಲ್ಲಿ ಖುದ್ದು ವೆಂಕಮ್ಮನವರೇ ಕಂದಾಯ ಸಚಿವ ಆರ್.ಅಶೋಕ್ ಗೆ ಮನವಿ ಮಾಡಿದ್ದರು. ಚುನಾವಣೆ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷದ ಮುಖಂಡರು ಭೇಟಿ ನೀಡಿ ರಸ್ತೆ ನಿರ್ಮಿಸಿ ಕೊಡುವ ಭರವಸೆ ನೀಡುತ್ತಾರೆ. ಆದರೆ, ಈವರೆಗೂ ಯಾರು ರಸ್ತೆ ನಿರ್ಮಿಸಿ ಕೊಡುವ ಗೋಜಿಗೆ ಹೋಗಿಲ್ಲ. ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ರಸ್ತೆ ನಿರ್ಮಿಸಿ ಕೊಡುವಂತೆ ಮನವಿ ಮಾಡಿಕೊಂಡರೆ ಅಧಿಕಾರಿಗಳು ಅಕ್ಕಪಕ್ಕದ ಜಮೀನು, ಮಾಲೀಕರ ಬಳಿ ಜಾಗ ಬಿಡಿಸಿಕೊಟ್ಟರೆ ರಸ್ತೆ ನಿರ್ಮಿಸಿ ಕೊಡುತ್ತೇವೆ ಎಂದು ಹೇಳುತ್ತಾರಂತೆ. ಆದರೆ, ಅಕ್ಕಪಕ್ಕದ ಜಮೀನುಗಳ ಮಾಲೀಕರು ರಸ್ತೆ ನಿರ್ಮಿಸಲು ಜಾಗ ಬಿಟ್ಟುಕೊಡಲು ಮುಂದಾಗುತ್ತಿಲ್ಲ. ಹಾಗಾಗಿ, ಗಂಟೆಮಕ್ಕಿ ಗ್ರಾಮದ ಎಂಟತ್ತು ಕುಟುಂಬಗಳು ಕಳೆದ 65-70 ವರ್ಷಗಳಿಂದಲೂ ಇದೇ ರೀತಿಯಾಗಿ ಬದುಕುತ್ತಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g