ಕುವೆಂಪು ಕಲಾ ಮಂದಿರದಲ್ಲಿ ಬಾಬಾ ಸಾಹೇಬರ ಅದ್ದೂರಿ ಜಯಂತಿ ಆಚರಣೆ
1 min readಚಿಕ್ಕಮಗಳೂರು : ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶ ಕಂಡ ಮಹಾನ್ ಚೇತನ ಅವರ ಕಲ್ಪನೆ ಆಲೋಚನೆಗಳು ದೇಶದ ಭವಿಷ್ಯದ ಭದ್ರ ಬುನಾದಿಯಾಗಿದೆ ಎಂದು ವಿಧಾನ ಪರಿಷತ್ತಿನ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅವರು ಹೇಳಿದರು.
ಅವರು ಇಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ತುಳಿತಕ್ಕೆ ಒಳಗಾದಂತಹ ಜನಾಂಗವನ್ನು ಅಸಮಾನತೆಯಿಂದ ಸಮಾನತೆಯ ಕಡೆಗೆ ಕೊಂಡೊಯ್ಯಲು ಹಾಗೂ ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಹೋರಾಟ ನಡೆಸಿದ ಅವರು ಮಾಡಿದ ಪ್ರಮಾಣಿಕ ಪ್ರಯತ್ನಗಳಿಂದಾಗಿ ಅವರನ್ನು ಇತಿಹಾಸದ ಪುಟಗಳಲ್ಲಿ ಸೇರ್ಪಡೆಯಾಗುವಂತೆ ಮಾಡಿವೆ ಎಂದ ಅವರು ಇಂತಹ ಮಹಾನ್ ವ್ಯಕ್ತಿಗಳನ್ನು ಮಾರ್ಗದರ್ಶಕರಾಗಿಟ್ಟುಕೊಂಡು ಅವರು ನಡೆದು ಬಂದ ದಾರಿಯಲ್ಲಿ ನಾವೆಲ್ಲರು ಸಾಗೋಣ ಎಂದು ಹೇಳಿದರು.
ವಿಧಾನ ಸಭಾ ಶಾಸಕರಾದ ಸಿ.ಟಿ.ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವಾತಂತ್ರ್ಯ ನಂತರದಲ್ಲಿ ದೇಶದ ವಿಭಜನೆಯನ್ನು ವಿರೋಧಿಸಿದವರಲ್ಲಿ ಅಂಬೇಡ್ಕರ್ ಅವರು ಪ್ರಮುಖರಾಗಿದ್ದಾರೆ ಎಂದ ಅವರು ಸ್ವಾತಂತ್ರ್ಯ ಬಂದು 74 ವರ್ಷ ಕಳೆದರು ಇಂದಿಗೂ ಕೂಡ ಪ್ರಭಲ ಪ್ರಜಾಸತಾತ್ಮಕ ರಾಷ್ಟ್ರವಾಗಿ, ವಿವಿಧತೆಯಲ್ಲಿ ವೈವಿಧ್ಯತೆಯನ್ನು ಒಳಗೊಂಡು ಏಕತೆಯನ್ನು ಮೈಗೂಡಿಸಿಕೊಂಡು ದೇಶ ಮುಂದೆ ಸಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವಂತಹ ಸಂವಿಧಾನವು ಭದ್ರ ಬುನಾದಿಯಾಗಿದೆ, ಕೇಂದ್ರ ಸರ್ಕಾರವು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆಯ 5 ಸ್ಥಳಗಳನ್ನು ಪಂಚಧಾಮವಾಗಿ ಗುರುತಿಸಿ ಅವುಗಳನ್ನು ಅಭಿವೃದ್ಧಿ ಪಡಿಸುವಂತಹ ಯೋಜನೆಯನ್ನು ಕೈಗೊಂಡಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ವಿದೇಶಿ ನೆಲದಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಪಡೆದವರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮೊದಲಿಗರಾಗಿದ್ದಾರೆ, ಇಂತಹ ಮಹಾನ್ ವ್ಯಕ್ತಿಗಳ ಜೀವನ ಶೈಲಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೊಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಯ ಬಗ್ಗೆ ಮೈಸೂರಿನ ವಿಶ್ರಾಂತ ಮಾಧ್ಯಮ ಉಪನ್ಯಾಸಕ ಹಾಗೂ ಅಂಬೇಡ್ಕರ್ ವಾದಿಗಳಾದ ಡಾ.ಬಿ.ಪಿ.ಮಹೇಶ್ ಚಂದ್ರ ಗುರು ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ವಿಧಾನ ಪರಿಷತ್ತಿನ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹಾಗೂ ವಿಧಾನ ಸಭಾ ಶಾಸಕ ಸಿ.ಟಿ.ರವಿ ಅವರು ಮಾಲಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಿ.ಜೆ.ಸೋಮಶೇಖರಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಸಂತಾ ಅನಿಲ್ ಕುಮಾರ್, ರವೀಂದ್ರ ಬೆಳವಾಡಿ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದ್ರಾಕ್ಷಾಯಿಣಿ ಪೂರ್ಣೇಶ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾವಿತ್ರಿ ರಾಜ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಪೂವಿತ, ಉಪ ವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್.ಎಂ.ಹೆಚ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಬಿ.ವಿ.ಚೈತ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g