ದಾಸರಹಳ್ಳಿ ಗ್ರಾ.ಪಂ ಗೆ ಅಧ್ಯಕ್ಷರಾಗಿ ಚಂದ್ರಶೇಖರ್, ಉಪಾಧ್ಯಕ್ಷರಾಗಿ ವಿನೋದ ಆಯ್ಕೆ
1 min readಚಿಕ್ಕಮಗಳೂರು-ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಾಸರಹಳ್ಳಿ ಗ್ರಾಮಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಗ್ರಾಮಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್ ಹಾಗೂ ಉಪಾಧ್ಯಕ್ಷರಾಗಿ ವಿನೋದ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಎಸ್. ಆರ್. ಮಂಜುನಾಥ್ ಘೋಷಿಸಿದರು.
ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಕ್ಷೇತ್ರದಲ್ಲಿ ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಬಹುತೇಕ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗುತ್ತಿದ್ದು ಇದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಅಧಿಕಾರವಧಿಯಲ್ಲಿ ಈ ಗ್ರಾಮ ಪಂಚಾಯಿತಿಗೆ 16 ಕೋಟಿ ರೂ ಅನುದಾನ ನೀಡಿ ಅಭಿವೃದ್ಧಿ ನಡೆಸಿರುವುದೇ ಸ್ಪಷ್ಟ ಉದಾಹರಣೆ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಹೆಚ್ಚು ಆಸಕ್ತಿ ವಹಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಚುನಾಯಿತ ಶಾಸಕರುಗಳೇ ಹೇಳುತ್ತಿದ್ದಾರೆ ಎಂದು ಆರೋಪಿಸಿದ ಅವರು ಗ್ರಾ.ಪಂ ಹಾಗೂ ನಗರದ ಅಭಿವೃದ್ಧಿಗೆ ಕೂಡಲೇ ಅನುದಾನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಸಾಮಾನ್ಯ ವರ್ಗದ ಅಭ್ಯರ್ಥಿ ಚಂದ್ರಶೇಖರ್ ಅವರನ್ನು 2ನೇ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದನ್ನು ಶ್ಲಾಘನೀಯ ಎಂದ ಅವರು ಉಪಾಧ್ಯಕ್ಷರಾಗಿ ಆಯ್ಕೆ ಆದ ವಿನೋದ ಅವರಿಗೆ ಶುಭ ಹಾರೈಸಿದ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಗ್ರಾಮಗಳ ಅಭಿವೃದ್ಧಿ ಮಾಡಿ ಪ್ರವಾಸೋದ್ಯಮ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಜೊತೆಗೆ ಟೋಲ್ಗೇಟ್ನಲ್ಲೇ ತಪಾಸಣಾ ಕೇಂದ್ರ ಸ್ಥಾಪಿಸಿ ಪ್ಲಾಸ್ಟಿಕ್ ಬಾಟಲ್ಗಳನ್ನು ತಡೆದರೆ ಪರಿಸರ ಉಳಿಯುತ್ತದೆ ಎಂದರು.
ಬಿಜೆಪಿ ವಕ್ತಾರ ಟಿ.ರಾಜಶೇಖರ್ ಮಾತನಾಡಿ ಅಧಿಕಾರ ಯಾರಿಗೂ ಶಾಶ್ವತವಲ್ಲ, ನಾವು ಮಾಡುವ ಕೆಲಸಗಳು ಶಾಶ್ವತ ಈ ಭಾಗದಲ್ಲಿ ಪ್ರವಾಸಿಗರು ಹೆಚ್ಚಾಗಿ ಆಗಮಿಸುವ ಹಿನ್ನೆಲೆ ಸ್ವಚ್ಚತೆಗೆ ಆದ್ಯತೆ ನೀಡಬೇಕು, ಗ್ರಾಮಸ್ಥರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಬಗೆಹರಿಸುವ ಮೂಲಕ ಗ್ರಾಮಗಳ ರಸ್ತೆ, ಕುಡಿಯುವ ನೀರು, ವಿದ್ಯುತ್, ಶಾಲೆ, ಅಂಗನವಾಡಿ ಸೇರಿದಂತೆ ಎಲ್ಲಾ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದರು.
ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಎಸ್ ಶಿವೇಗೌಡ ಮಾತನಾಡಿ ಕಳೆದ 19 ವರ್ಷದ ಅಧಿಕಾರವಧಿಯಲ್ಲಿ ಮಾಜಿ ಸಚಿವ ಸಿ.ಟಿ ರವಿ ಅವರು ಸಾಕಷ್ಟು ಅನುದಾನ ನೀಡಿರುವುದರಿಂದ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ರಸ್ತೆಗಳು ಡಾಂಬರೀಕರಣ, ಸಿಮೆಂಟ್ ರಸ್ತೆ, ಸಮುದಾಯ ಭವನ, ಕುಡಿಯುವ ನೀರಿನ ವ್ಯವಸ್ಥೆ ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗಿದೆ ಎಂದರು.
ದಾಸರಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ ಚುನಾಯಿತ ಸದಸ್ಯರನ್ನು ಹಾಗೂ ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವ ಜೊತೆಗೆ ಎಲ್ಲಾ ಬಡ ವರ್ಗದ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ತಾರತಮ್ಯವಿಲ್ಲದೆ ಸಮರ್ಪಕವಾಗಿ ನಿರ್ವಹಿಸುತ್ತೇನೆಂದು ಭರವಸೆ ನೀಡಿದರು.
ಉಪಾಧ್ಯಕ್ಷೆ ವಿನೋದ ಮಾತನಾಡಿ ನನ್ನನ್ನು 2ನೇ ಅವಧಿಗೆ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿ ಸದಸ್ಯರು, ಗ್ರಾಮಸ್ಥರು ಹಾಗೂ ಪಕ್ಷದ ಮುಖಂಡರ ಸಹಕಾರವನ್ನು ಕೋರಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಭರಣ್ಯ, ಮುಖಂಡರಾದ ಜೆ.ಡಿ ಲೋಕೇಶ್, ಕೆ.ಪಿ ವೆಂಕಟೇಶ್, ಜಯ್ಯಣ್ಣ, ಮಂಜುನಾಥ್ ಸದಸ್ಯರುಗಳಾದ ದೀಪಕ್, ಅವಿಲಾ, ಲಲಿತಾ, ಮಂಜುನಾಥ್, ಮಾಲಶ್ರೀ, ಪಿಡಿಓ ಸುಶ್ಮಿತಾಗೌಡ, ಕಾರ್ಯದರ್ಶಿ ನಾಗೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g