ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
1 min readಚಿಕ್ಕಮಗಳೂರು: ಭೂಮಿ ವಸತಿ, ವಿದ್ಯಾರ್ಥಿ ವೇತನ, ಹಾಸ್ಟೇಲ್ಗಳಲ್ಲಿ ಮೂಲಭೂತ ಸೌಲಭ್ಯ, ಪಿಟಿಸಿಎಲ್ ಕಾಯ್ದೆ ತಿದ್ದುಪಡಿ, ನಾಗರಿಕ ಹಕ್ಕು ಜಾರಿ ದಳ ರಕ್ಷಣಾತ್ಮಕ ಅಧಿಕಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಆಜಾದ್ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡ ಮುಖಂಡರು ಮತ್ತು ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಶಿಕ್ಷಣ ತಜ್ಞರಲ್ಲದ ರೋಹಿತ್ ಚಕ್ರತೀರ್ಥ ಸಮಿತಿ ಅಧ್ಯಕ್ಷತೆಯಲ್ಲಿ ನೀಡಿರುವ ಪಠ್ಯ ಪುಸ್ತಕವನ್ನು ರದ್ದುಗೊಳಿಸಿ ಹಿಂದಿನ ಪಠ್ಯಪುಸ್ತಕವನ್ನು ನೀಡಬೇಕು. ಎಸ್.ಸಿ., ಎಸ್.ಟಿ ವರ್ಗದವರಿಗೆ ಎಸ್ಸಿಎಸ್ಪಿ, ಟಿಎಸ್ಪಿ ದುರುಪಯೋಗ ತಡೆಗಟ್ಟಬೇಕು ಹಾಗೂ ಕಾಯ್ದೆಯಲ್ಲಿರುವ ದಲಿತ ವಿರೋಧಿ ಸಕ್ಷನ್ 7(ಡಿ) ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿನ ಒತ್ತುವರಿ ಭೂಮಿಯನ್ನು ತೆರವುಗೊಳಿಸಿ ಭೂ ಹೀನರಿಗೆ ನೀಡಬೇಕು. ಭೂ ಮಾಲೀಕರಿಗೆ ಗುತ್ತಿಗೆ ನೀಡುವುದರನ್ನು ರದ್ದುಗೊಳಿಸಬೇಕು. ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಮಾಡಬೇಕು. ನ್ಯಾಯಾಲಯದಲ್ಲಿ ಪರಿಶಿಷ್ಟರ ವಿರುದ್ಧ ನೀಡಿರುವ ತೀರ್ಪುಗಳನ್ನು ತಡೆಹಿಡಿ ಯಬೇಕು. ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ರದ್ದುಗೊಳಿಸ ಬೇಕು ಹಾಗೂ ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಎಸ್.ಸಿ.,ಎಸ್.ಟಿ., ವಿದ್ಯಾರ್ಥಿ ವೇತನವನ್ನು ಕೂಡಲೇ ಮಂಜೂರು ಮಾಡಬೇಕು. ನ್ಯಾ| ನಾಗಮೋಹನದಾಸ್ ವರದಿಯಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು. ದಲಿತ ದೌರ್ಜನ್ಯ ತಡೆಗಟ್ಟಲು ವಿಫಲವಾಗಿರುವ ಪೊಲೀಸ್ ಇಲಾಖೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು. ವಸತಿರಹಿತರಿಗೆ ಉಚಿತ ವಸತಿ ಸೌಕರ್ಯ ಕಲ್ಪಿಸಬೇಕು. ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವಂತೆ ತಿಳಿಸಿದರು.
ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರನ್ನು ನಮ್ಮನಾಳುವ ಸರ್ಕಾರ ಮೋಸ ಮಾಡುತ್ತಾ ಬಂದಿದೆ. ಪ್ರಜಾಪ್ರಭುತ್ವ ರಾಷ್ಟವಾಗಿ ಉಳಿದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗ ದ ಜನರಿಗೆ ನಿಜವಾದ ಸ್ವಾತಂತ್ರ್ಯ ಲಭಿಸಿಲ್ಲ. ನಮ್ಮ ಸ್ವಾತಂತ್ರ್ಯಕ್ಕಾಗಿ ನಿರಂತರವಾಗಿ ಹೋರಾಟ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟು ಪ್ರದರ್ಶಿಸಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ತಿಳಿಸಿದರು.
ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಮಾತನಾಡಿ, ಅಧಿಕಾರದಲ್ಲಿರುವ ಸರ್ಕಾರ ದುಡ್ಡು ಹೊಡೆಯುವ ಕಾರ್ಯಕ್ರಮಗಳನ್ನು ಹಾಕಿಕೊಂಡಿವೇ ಹೊರತು ಜನಸಾಮಾನ್ಯರ ಕಲ್ಯಾಣದ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಕಮಿಷನ್ ಸರ್ಕಾರ ಇದೆ. ಜಿಲ್ಲೆಯನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರು, ಕೇಂದ್ರ ಮಂತ್ರಿಗಳ ಹೆಸರು ಅನೇಕರಿಗೆ ಗೊತ್ತಿಲ್ಲ. ಸಾಮಾನ್ಯ ಜನರು ಹೋರಾಟಕ್ಕೆ ಬರುವುದು ಮನೆಗೆ ಹೋಗುವುದಕ್ಕೆ ಮಾತ್ರ ಸೀಮಿತವಾಗಬಾರದು. ಮುಂಬರುವ ಚುನಾವಣೆಗಳಲ್ಲಿ ತಕ್ಕಪಾಠ ಕಲಿಸಬೇಕು. ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಮರ್ಲೆ ಅಣ್ಣಯ್ಯ, ಕೂದುವಳ್ಳಿ ಮಂಜು, ದಂಟರಮಕ್ಕಿ ಶ್ರೀನಿವಾಸ್, ಕೃಷ್ಣಮೂರ್ತಿ, ಗೌಸ್ಮೋಹಿದ್ದೀನ್, ರವೀಶ್ ಬಸಪ್ಪ, ಟಿ.ಎಲ್.ಗಣೇಶ್, ಅಮ್ಜದ್, ಗುರುಶಾಂತಪ್ಪ ಸೇರಿದಂತೆ ಅನೇಕರು ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g