ಅನುದಾನ ಹಂಚಿಕೆಯಲ್ಲಿ ತಾರತಮ್ಯ, ಪಿಡಿಓ-ಪಂಚಾಯಿತಿ ಸದಸ್ಯ ಫೈಟ್
1 min read
ಚಿಕ್ಕಮಗಳೂರು. ಅನುದಾನ ಹಂಚಿಕೆ ತಾರತಮ್ಯದ ಆರೋಪ ಕೇಳಿ ಬಂದಿದ್ದು, ಪಿಡಿಒ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಮಧ್ಯೆ ಜಟಾಪಟಿ ನಡೆದು, ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಅನುದಾನ ಹಂಚಿಕೆ ವಿಚಾರವಾಗಿ ಗ್ರಾಮ ಪಂಚಾಯತಿ ಸದಸ್ಯ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಡುವೆ ಮಾತಿಗೆ ಮಾತು ಬೆಳೆದು ಕೈ-ಕೈ ಮಿಲಾಯಿಸಿಕೊಂಡಿದ್ದಾರೆ ಎನ್ನಲಾಗಿದೆ. ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ನಾಗೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ವಸಂತ್ ಕುಮಾರ್ ಮತ್ತು ಪಿಡಿಒ ಪದ್ದಣ್ಣ ಗಾವಾಡಿಯ ನಡುವೆ ಚರಂಡಿ ಸ್ವಚ್ಛತೆ ವಿಚಾರದಲ್ಲಿ ಆರಂಭವಾದ ಜಗಳ ಅನುದಾನ ಹಂಚಿಕೆ ವಿಷಯಕ್ಕೆ ತಿರುಗಿ ಪರಸ್ಪರ ಬಡಿದಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸಖರಾಯಪಟ್ಟಣ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದ್ದು ಪಿಡಿಒ ತಲೆ ಮರೆಸಿಕೊಂಡಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯರು ರಾಜಿ ಪಂಚಾಯಿತಿ ಮಾಡಲು ಯತ್ನಿಸಿದ್ದರೂ ಕೂಡ ಪಂಚಾಯಿತಿ ಕಾರ್ಯದರ್ಶಿ ವೆಂಕಟೇಶ್ ಉದ್ದೇಶ ಪೂರ್ವಕವಾಗಿ ಪಿಡಿಓರವರನ್ನು ತಲೆ ಮರೆಸಿಕೊಳ್ಳಲು ಸಹಕಾರ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಖರಾಯಪಟ್ಟಣ ಠಾಣೆ ಎದುರು ರಸ್ತೆ ತಡೆ ನಡೆಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಂಧಿಸುವಂತೆ ಒತ್ತಾಯಿಸಿದ್ದಾರೆ. ರಸ್ತೆ ತಡೆ ನಡೆಸಿದ ಹಿನ್ನೆಲೆ ಕೆಲ ಕಾಲ ಸಂಚಾರ ಕೂಡ ಅಸ್ತವ್ಯಸ್ತಗೊಂಡಿತ್ತು. ಪ್ರಕರಣ ಈಗ ರಾಜಕೀಯ ಸ್ವರೂಪ ಪಡೆದಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g