ಇಂದಾವರ ಗ್ರಾ.ಪಂ ಪಿಡಿಓಗೆ ಹಲ್ಲೆ ಆರೋಪ, ಡಿಸಿಗೆ ಮನವಿ
1 min readಚಿಕ್ಕಮಗಳೂರು: ತಾಲೂಕಿನ ಇಂದಾವರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿರುವುದನ್ನು ರಾಜ್ಯ ಪಂಚಾಯಿತಿ ಅಭಿವೃದ್ಧಿ ಅದಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಖಂಡಿಸಿದೆ.ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದ್ದು, ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿದರು.
ಇಂದಾವರ ಗ್ರಾ.ಪಂ. ಪಿಡಿಒ ಎಚ್.ನರಸಿಂಹಮೂರ್ತಿ ಅವರು ಓಂಬುಡ್ಸ್ಮನ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಯೊಂದಿಗೆ ಸ್ಥಳ ಪರಿಶೀಲನೆ ನಡೆಸುತ್ತಿರುವಾಗಲೇ ಯತೀಶ್ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಪಿಡಿಒ ವಿರುದ್ಧ ಲೈಂಗಿಕ ದೌರ್ಜನ್ಯದ ಸುಳ್ಳು ಪ್ರಕರಣ ದಾಖಲಿಸಿ, ಗ್ರಾ.ಪಂ.ನ ಎಲ್ಲ ಯೋಜನೆಗಳ ಬಗ್ಗೆ ಸುಳ್ಳು ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.ಆರೋಪಿ ಯತೀಶ್ನನ್ನು ಬಂಧಿಸಿ ಕಟ್ಟುನಿಟ್ಟಾದ ಕಾನೂನು ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಿಡಿಒಗಳು, ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ವಿವಿಧ ಗ್ರಾ.ಪಂ.ಗಳಲ್ಲಿ ಈ ಹಿಂದೆ ಕೂಡ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಹಲ್ಲೆಗೆ ಯತ್ನಿಸಿದ ಬಗ್ಗೆ ದಾಖಲಾಗಿರುವ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು. ಮೇಲಾಧಿಕಾರಿಗಳು ಎಲ್ಲ ರಕ್ಷಣಾತ್ಮಕ ಉಪ ಕ್ರಮಗಳನ್ನು ಕೈಗೊಳ್ಳಬೇಕು. ಉನ್ನತ ಪ್ರಾಧಿಕಾರಗಳು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಟಿ.ಯೋಗೀಶ್, ಪ್ರಧಾನ ಕಾರ್ಯದರ್ಶಿ ಜಿ.ಸಿ.ರಾಜ ವಿಜಯನ್, ಖಜಾಂಚಿ ಎಚ್.ಜಿ.ರಾಜು, ಸಂಘಟನಾ ಕಾರ್ಯದರ್ಶಿ ಎಚ್.ಎನ್.ಶೇಖರ್, ಕ್ರೀಡಾ ಕಾರ್ಯದರ್ಶಿ ಬಿ.ಆರ್.ಯತೀಶ್, ಪಿಡಿಒಗಳಾದ ನರಸಿಂಹಮೂರ್ತಿ, ಜಗನ್ನಾಥ್, ಕಿರಣ, ಪ್ರಸನ್ನ ಹಾಜರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g