ಮಲೆನಾಡಲ್ಲಿ ಮಳೆ ಅಬ್ಬರ, ಮನೆ ಕುಸಿತ, ರಸ್ತೆ ಬಿರುಕು, ಮಲೆನಾಡಿಗರು ಕಂಗಾಲು
1 min read
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ತಿಂಗಳ ಹಿಂದಷ್ಟೇ ಪೂರ್ಣಗೊಂಡ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಘಟನೆ ಕಳಸ ತಾಲೂಕಿನ ಕೌನಲ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡ್ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾಗುತ್ತಿಲ್ಲ. ಕಳಸ ತಾಲೂಕಿನಲ್ಲಿ ಯತೇಚ್ಛವಾಗಿ ಸುರಿಯುತ್ತಿದೆ. ಭಾರೀ ಮಳೆಯಿಂದ ಏಳು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸಿಮೆಂಟ್ ರಸ್ತೆ ಬಿರುಕು ಬಿಟ್ಟಿರುವ ಪರಿಣಾಮ ಗ್ರಾಮಸ್ಥರು ಸಂಚರಿಸಲು ಹೆದರುವಂತಹಾ ಸ್ಥಿತಿ ನಿರ್ಮಾಣವಾಗಿದೆ. ಈ ಸಿಮೆಂಟ್ ರಸ್ತೆ ಕಳೆದ ಒಂದು ತಿಂಗಳ ಹಿಂದಷ್ಟೆ ಪೂರ್ಣಗೊಂಡಿತ್ತು. ಇದೀಗ, ಆ ರಸ್ತೆಯೂ ಬಿರುಕು ಬಿಟ್ಟಿರುವುದರಿಂದ ಜನ ಆತಂಕಕ್ಕೀಡಾಗಿದ್ದಾರೆ. ರಸ್ತೆ ಬಿರುಕು ಬಿಟ್ಟಿರುವುದರ ಜೊತೆ ರಸ್ತೆ ಬದಿಯಲ್ಲಿ ನಿರ್ಮಿಸಿದ್ದ ವಾಲ್ ಕೂಡ ಕುಸಿತವಾಗಿದೆ. ರಸ್ತೆ ಮಧ್ಯೆದಲ್ಲಿ ಬಿರುಕು ಬಿಟ್ಟಿರುವ ಕಾರಣ ಕೌನಲ ಗ್ರಾಮದ ಜನ ಕಳಸ ಪಟ್ಟಣಕ್ಕೆ ತೆರಳಲು ಕಾಲ್ನಡಿಯಲ್ಲಿ ತೆರಳುವಂತಾಗಿದೆ.
ಸ್ಥಳಿಯರು ಕಳಪೆ ಕಾಮಗಾರಿಯಿಂದಲೇ ರಸ್ತೆ ಬಿರುಕು ಬಿಟ್ಟಿರೋದು ಎಂದು ಆರೋಪಿಸಿದ್ದಾರೆ. ಜಿಲ್ಲೆಯ ಇತರೆ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ಭಾಗದಲ್ಲೂ ಭಾರೀ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನ ಮನೆಯಿಂದ ಹೊರಬರದಂತಹಾ ಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ತುಂಗಾ-ಭದ್ರಾ, ಹೇಮಾವತಿ ನದಿ ಸೇರಿದಂತೆ ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ನದಿಪಾತ್ರದ ಹೊಲ-ಗದ್ದೆ, ತೋಟಗಳಿಗೆ ನೆರೆಭೀತಿ ಆವರಿಸಿದೆ. ಕಳಸ ತಾಲೂಕಿನ ಹೊರನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕವನಹಳ್ಳಿಯಲ್ಲಿ ಭಾರೀ ಮಳೆಯಿಂದ ಯಶೋಧ ಎಂಬುವರ ಮನೆಯ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಳಸ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು ಭದ್ರಾ ನದಿಯ ನೀರಿನ ಹರಿವು ಹೆಚ್ಚಾಗಿದ್ದು, ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗುವ ಭೀತಿ ಎದುರಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g