ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ
1 min read
ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆ.25ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಮತ್ತು ಗ್ರಾಮ ಪಂಚಾಯತ್ ನೌಕರರ ಫೆಡರೇಷನ್ ವತಿಯಿಂದ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮತ್ತು ಗ್ರಾಮ ಪಂಚಾಯಿತಿ ನೌಕರರ ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ವಿಜಯಕುಮಾರ್ ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ 227 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್ಕಲೆಕ್ಟರ್, ಆರ್.ಡಿ.ಎ., ವಾಟರ್ಮ್ಯಾನ್, ಅಟೆಂಡರ್, ಜಾಡುಮಾಲಿಗಳ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.
ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ವ್ಯಾಪ್ತಿಗೆ ತರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಅದಕ್ಕೆ ಅವರು ಭರವಸೆ ನೀಡಿದ್ದರು. ಆದರೆ ಈವರೆಗೂ ಭರವಸೆ ಈಡೇರಿಲ್ಲವೆಂದು ದೂರಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವರು ಗ್ರಾಮ ಪಂಚಾಯಿತಿ ನೌಕರರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಹಾಗಾಗಿ ಹಲವಾರು ಹುದ್ದೆಗಳು ಖಾಲಿಯಾಗಿವೇ, ಖಾಲಿ ಹುದ್ದೆಗಳನ್ನು ಯಾರು ಭರ್ತಿ ಮಾಡಬೇಕು ಎಂದು ಪ್ರಶ್ನಿಸಿದ ಅವರು, ಈ ಗೊಂದಲವನ್ನು ಸರಿಪಡಿಸಬೇಕೆಂದು ಸಚಿವರನ್ನು ಆಗ್ರಹಿಸಿದರು.
ಗ್ರಾಮ ಪಂಚಾಯಿತಿ ನೌಕರರಿಗೆ 10 ರಿಂದ 20 ತಿಂಗಳ ವೇತನ ಬಾಕಿ ಇದ್ದು,ಕೂಡಲೇ ವೇತನ ಪಾವತಿಸಬೇಕು. ಈ ಸಂಬಂಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಬೇಕು.ಬಿಲ್ ಕಲೆಕ್ಟರ್, ವಾಟರ್ಮ್ಯಾನ್ ಮತ್ತು ಅಂಟೆಂಡರ್ರಗಳಿಗೆ ನಿಯಾಮಾನುಸಾರ ಬಡ್ತಿ ನೀಡಬೇಕೆಂದರು.
ಬಿಲ್ ಕಲೆಕ್ಟರ್ ಮತ್ತು ಡಾಟಾ ಎಂಟ್ರಿ ಸಿಬ್ಬಂದಿಗಳ ಜ್ಯೇಷ್ಠತಾ ಪಟ್ಟಿ ತಯಾರಿಸಿ ಸೂಕ್ತ ಹುದ್ದೆಗೆ ನೇಮಕ ಮಾಡಬೇಕು. ಮುಕ್ತ ವಿಶ್ವವಿದ್ಯಾಲಯ ಅಂಕಪಟ್ಟಿಯನ್ನು ಪರಿಗಣಿಸಿ ನೌಕರರಿಗೆ ಅನುಮೋದನೆ ನೀಡುವುದರೊಂದಿಗೆ ಪ್ರತಿ ತಿಂಗಳು ವೇತನ ಪಾವತಿ ಮಾಡಬೇಕು. ಸಿಬ್ಬಂದಿಗಳನ್ನು ಇಎಸ್ಐ, ಫಿ.ಎಫ್ ವ್ಯಾಪ್ತಿಗೆ ಒಳಪಡಿಸಿ, 18 ರಿಂದ 20 ಸಾವಿರಕ್ಕೆ ವೇತನವನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿದರು.
ಫೆಡರೇಷನ್ ಕಡೂರು ಅಧ್ಯಕ್ಷ ಕೃಷ್ಣಾನಾಯ್ಕ್, ಚಿಕ್ಕಮಗಳೂರು ಕಾರ್ಯದರ್ಶಿ ಉಮೇಶ್, ಅಜ್ಜಂಪುರ ತಾಲೂಕು ಅಧ್ಯಕ್ಷ ರಾಜಪ್ಪ, ಆರ್.ಬಸವರಾಜ್, ಮಂಜಪ್ಪ, ರಾಜು, ರವಿಕುಮಾರ್ ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g