ಕೇಂದ್ರ ಸರ್ಕಾರದ ನೀತಿ ಖಂಡಿಸಿ ಪ್ರತಿಭಟನೆ, ಆಕ್ರೋಶ
1 min readಚಿಕ್ಕಮಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡುವಂತೆ ಒತ್ತಾಯಿಸಿ ರೈತ, ಕಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಎಐಟಿಯುಸಿ ಕಚೇರಿಯಿಂದ ರೈತ-ಕಾಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಮುಖ್ಯರಸ್ತೆಯಲ್ಲಿ ತೆರಳಿ ಆಜಾದ್ ವೃತ್ತ ತಲುಪಿ ಅಲ್ಲಿ ಧರಣಿ ನಡೆಸಿದರು. ಕೇಂದ್ರ ಮತ್ತು ರಾಜ್ಯಸರ್ಕಾರದ ಕಾರ್ಮಿಕ, ರೈತವಿರೋಧಿ, ಖಾಸಗೀಕರಣ ನೀತಿಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು.
ಪ್ರತಿಭಟನಾನಿರತರನ್ನುದ್ದೇಶಿಸಿ ಮಾತನಾಡಿದ ಎಐಟಿಯುಸಿ ಜಿಲ್ಲಾಧ್ಯಕ್ಷ ಕೆ.ಗುಣಶೇಖರ್, ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ದುಡಿಯುವ ವರ್ಗಕ್ಕೆ ನ್ಯಾಯ ಸಿಗುತ್ತಿಲ್ಲ, ಹೋರಾಟ ಮಾಡದೆ ಹೋದರೆ ಯಾವ ಸಮಸ್ಯೆಯೂ ಬಗೆಹರಿಯುವುದಿಲ್ಲ,ತಮ್ಮ ಹಕ್ಕಿಗಾಗಿ ನಿನ್ನೆಯಿಂದ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ ಎಂದು ಹೇಳಿದರು.
ಕೈಗಾರಿಕೆ, ಆರೋಗ್ಯ, ಶಿಕ್ಷಣ, ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಉಳ್ಳವರ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಟೀಕಿಸಿದ ಅವರು, ಕಾರ್ಮಿಕ ವರ್ಗಕ್ಕೆ ರಕ್ಷಣೆ ಇಲ್ಲದಂತಾಗಿದೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ.ಯಾವುದೇ ವರ್ಗದ ಜನರಿಗೆ ನೆಮ್ಮದಿ ಇಲ್ಲವಾಗಿದೆ ಎಂದು ತಿಳಿಸಿದರು.
ದುಡಿಯುವ ವರ್ಗದ ಜನರು ಒಗ್ಗಟ್ಟಾಗಿ ಕೇಂದ್ರ ಸರ್ಕಾರವನ್ನು ಬದಲಾಯಿಸಲು ಮುಂದಾಗದಿದ್ದರೆ ಬಡವರ ಸಮಸ್ಯೆಗಳ ನಿವಾರಣೆಯಾಗುವುದಿಲ್ಲ.ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯುವುದನ್ನು ತಪ್ಪಿಸಲು ಸಂಕಲ್ಪಮಾಡಬೇಕಾಗಿದೆ ಎಂದು ಹೇಳಿದರು.
ಕಾರ್ಮಿಕ ವರ್ಗಗಳ ಜಂಟಿ ಸಮಿತಿ ಸಂಚಾಲಕ ಬಿ.ಅಮ್ಜದ್ ಮಾತನಾಡಿ, ದೇಶದಲ್ಲಿ ಸಾಮಾಜಿಕ ಕ್ಷೋಭೆ ಉಂಟಾಗಿದೆ. ಸಾಮಾಜಿಕ ಸಾಮಾರಸ್ಯಕ್ಕೆ ತಿಲಾಂಜಲಿ ಇಡಲಾಗಿದೆ. ಜನರ ಹಕ್ಕುಗಳ ಸಂರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗಾಗಿ, ದೇಶದ ರಕ್ಷಣೆಗೆ, ಜನರ ಉಳಿವಿಗೆ ಚಳವಳಿ ಹಾದಿ ತುಳಿಯಲಾಗಿದೆ ಎಂದರು.
ಕಾರ್ಮಿಕ ಸಂಘಟನೆ ಮುಖಂಡ ಪ್ರಕಾಶ್ ಮಾತನಾಡಿ,ಕೇಂದ್ರ ಮತ್ತು ರಾಜ್ಯದಲ್ಲಿರುವ ಕಾರ್ಮಿಕ ವಿರೋಧಿ ಸರ್ಕಾರವನ್ನು ಮನೆಗೆ ಕಳುಹಿಸಬೇಕಾಗಿದೆ. ಸಣ್ಣ ಕೈಗಾರಿಕೆಗಳು ಬಾಗಿಲು ಮುಚ್ಚಿತ್ತಿದ್ದು, ಈ ಸರ್ಕಾರವನ್ನು ತೊಲಗಿಸಲು ದುಡಿಯುವ ವರ್ಗ ಸಂಕಲ್ಪಮಾಡಬೇಕಿದೆ ಎಂದು ತಿಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g