ಮತಾಂತರ ನಿಷೇಧ ಕಾಯ್ದೆ ರದ್ದು, ಸಿದ್ರಾಮುಲ್ಲಾ ಖಾನ್ ಎಂದು ಘೋಷಣೆ ಕೂಗಿ ಆಕ್ರೋಶ
1 min read
ಚಿಕ್ಕಮಗಳೂರು.ಗೋ ಹತ್ಯೆ ಹಾಗೂ ಮತಾಂತರ ನಿಷೇಧ ಕಾಯ್ದೆಯನ್ನ ವಾಪಸ್ ಪಡೆಯುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜವನ್ನ ಬಲಿಕೊಡಲು ಹೊರಟಿದೆ ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಸರ್ಕಾರ ಅಧಿಕಾರಕ್ಕೆ ಬಂದ ಹದಿನೈದೇ ದಿನದಲ್ಲಿ ಮುಸ್ಲಿಮರ ತುಷ್ಟೀಕರಣಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ಸಿದ್ರಾಮುಲ್ಲಾ ಖಾನ್ ಎಂದು ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಪ್ರತಿಭಟನಾಕಾರರನ್ನ ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ರಂಗನಾಥ್, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ಚಟಕ್ಕಾಗಿ ಹಿಂದೂ ಸಮಾಜವನ್ನು ಬಲಿಕೊಡಲು ಮುಂದಾಗಿದ್ದಾರೆ. ಸುಳ್ಳು ಭರವಸೆ, ಪೊಳ್ಳು ಮಾತುಗಳನ್ನು ಆಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರು ಸತ್ಯವನ್ನೇ ಹೇಳಿದ್ದರೆ ಕೇವಲ 15ಸ್ಥಾನಕ್ಕೆ ಇಳಿಯುತ್ತಿದ್ದರು. ಇದೀಗ ಹಿಂದೂಗಳನ್ನು ತುಳಿದು ಮುಸ್ಲಿಮರ ಅಟ್ಟಹಾಸಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ ಎಂದು ದೂರಿದ್ದಾರೆ. ಎಲ್ಲಿ ಮತಾಂತರ ನಡೆಯುತ್ತದೆ ಅಲ್ಲಿಗೆ ಬಜರಂಗದಳ ಹೋಗೇ ಹೋಗುತ್ತದೆ. ಅದನ್ನು ತಡೆದೇ ತಡೆಯುತ್ತದೆ. ಲವ್ ಜಿಹಾದ್, ಭಯೋತ್ಪಾಧನೆಗಳನ್ನು ತಡೆಯುತ್ತೇವೆ ಎಂದರು. ಸರ್ಕಾರದ ಈ ಧೋರಣೆಯಿಂದ ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗುತ್ತದೆ. ಅಮಾಯಕ ಹಿಂದೂಗಳನ್ನು ಕ್ರಿಶ್ಚಿಯನ್ ಮಿಷನರಿಗಳು ಆಮಿಷಗಳ ಮೂಲಕ ಮತ್ತು ಮುಸ್ಲಿಮರು ಲವ್ ಜಿಹಾದ್ ಮೂಲಕ ಮತಾಂತರ ಮಾಡಲಿದ್ದಾರೆ. ಅದನ್ನು ತಡೆಯುವ ಉದ್ದೇಶದಿಂದ ಬಿಜೆಪಿ ಜಾರಿಗೆ ತಂದ ಕಾಯಿದೆಯನ್ನು ಕಾಂಗ್ರೆಸ್ ಹಿಂದೆ ಪಡೆಯುವ ಕೆಟ್ಟ ಹುನ್ನಾರಕ್ಕೆ ಕೈ ಹಾಕಿದೆ ಎಂದು ಆರೋಪಿಸಿದರು. ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ಹಿಂದಕ್ಕೆ ಪಡೆದಿರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಷಡ್ಯಂತ್ರಗಳನ್ನು ಜಾರಿಗೆ ತರಲು ಹೊರಟಿದೆ. ಸರ್ಕಾರ ತಕ್ಷಣ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದ ಮೂಲಕ ಹಿಂದೂಗಳಿಗೆ ಅನ್ಯಾಯ ಮಾಡುತ್ತಿದೆ. ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳೆರಡನ್ನು ಸಿದ್ದರಾಮಯ್ಯ ಸರ್ಕಾರ ಹಿಂದಕ್ಕೆ ಪಡೆಯುತ್ತಿರುವುದು ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹದ್ದು, ಅಲ್ಪ ಸಂಖ್ಯಾತರನ್ನು ಓಲೈಸುವುದಷ್ಟೇ ಇದರ ಉದ್ದೇಶವಾಗಿದೆ. ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶಿಸಿ ಎರಡೂ ಪ್ರಮುಖ ಕಾಯಿದೆಗಳನ್ನು ಮುಂದುವರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ರಸ್ತೆ ತಡೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಬಿಡುಗಡೆಗೊಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g