ರಾಷ್ಟ್ರದ ಏಳಿಗೆಗೆ ಮಹಿಳೆಯ ಕೊಡುಗೆ ಅಪಾರ – ಜಿಲ್ಲಾಧಿಕಾರಿ ಕೆ.ಎನ್.ರಮೇಶ್
1 min readಚಿಕ್ಕಮಗಳೂರು, ಮಾ.೦೮: ಸ್ವಾಮಿ ವಿವೇಕಾನಂದರ ಮಾತಿನಂತೆ, ಸಮಾಜದಲ್ಲಿ ಮಹಿಳೆಯರನ್ನು ಹಿಂದಕ್ಕಿಟ್ಟು ರಾಷ್ಟ್ರವನ್ನು ಮೇಲೆತ್ತಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಹಿತಕ್ಕಾಗಿ, ಸರ್ವತೋಮುಖ ಅಭಿವೃದ್ಧಿಗಾಗಿ ಮಹಿಳೆಯರು ಸಮಾಜದಲ್ಲಿ ಮುಂದೆ ಬರಲು ಪುರುಷರು ಸ್ವಾತಂತ್ರ್ಯ ಹಾಗೂ ಪೂರಕ ವಾತವರಣವನ್ನು ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹೇಳಿದರು.
ಚಿಕ್ಕಮಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ, ಜಿಲ್ಲೆಯ ಸ್ತ್ರೀ ಶಕ್ತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕುವೆಂಪು ಕಲಾಮಂದಿರದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
೧೯೫೧ ರಿಂದ ೨೦೨೦ ರವರೆಗೆ ಬಂದ ೧೧,೫೬೯ ಐಎಎಸ್ ಅಧಿಕಾರಿಗಳಲ್ಲಿ ಕೇವಲ ೧೫೨೭ ಮಹಿಳಾ ಅಧಿಕಾರಿಗಳು ಇದ್ದಾರೆ. ಇದಕ್ಕೆ ಕಾರಣ ಮಹಿಳೆಯರಿಗೆ ಸಿಗಬೇಕಾದ ಸೌಕರ್ಯ ಮತ್ತು ಸ್ವಾತಂತ್ರ್ಯದ ಕೊರತೆ. ಕುಟುಂಬದಲ್ಲಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಹಾಗೂ ಸವಲತ್ತುಗಳನ್ನು ನೀಡಿದರೆ ರಾಷ್ಟ್ರ ಮುಂದಕ್ಕೆ ಹೋಗುವುದರಲ್ಲಿ ಅನುಮಾನವಿಲ್ಲ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ೨೨೦ ಗ್ರಾಮ ಪಂಚಾಯಿತಿ ಒಕ್ಕೂಟಗಳನ್ನು ರಚಿಸಿ ೩೨೦೦ ಸ್ವಸಹಾಯ ಸಂಘಗಳನ್ನು ಅದರ ವ್ಯಾಪ್ತಿಗೆ ತರಲಾಗಿದೆ. ಒಟ್ಟು ೮೫,೦೦೦ ಮಹಿಳೆಯರು ಒಕ್ಕೂಟಗಳ ಸದಸ್ಯರಾಗಿದ್ದಾರೆ. ಈ ರೀತಿಯಾಗಿ ಮಹಿಳೆಯರು ಕ್ರಿಯಾಶೀಲರಾಗಿ ಹಲವಾರು ಕೌಶಲ್ಯಾಭಿವೃದ್ಧಿ ಚಟುವಟಿಗೆಗಳಲ್ಲಿ ತೊಡಗಿದ್ದಾರೆ ಎಂದರು.
ಕಲಾಮಂದಿರದ ಆವರಣದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವ-ಸಹಾಯ ಸಂಘಗಳು ಉತ್ಪಾದಿಸಿರುವ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಏರ್ಪಡಿಸಲಾಗಿತ್ತು.
ಸಮಾರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಪುರಸ್ಕಾರ ನೀಡಲಾಯಿತು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಗುರುತಿನ ಚೀಟಿ ವಿತರಿಸಲಾಯಿತು.
ಸಮಾರಂಭದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಕಸ್ತೂರಿಬಾ ಸದನದ ಕಾರ್ಯದರ್ಶಿ ಮೋಹಿನಿ ಸಿದ್ದೇಗೌಡ ಅವರು, ಈ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಶೋಷಣೆ ತಪ್ಪಿದ್ದಲ್ಲ. ಆಧುನಿಕ ಹೆಣ್ಣು ಮಕ್ಕಳು ಸಹ ನಾನಾ ರೀತಿಯ ಮಾನಸಿಕ ಶೋಷಣೆಗೆ ಒಳಗಾಗುತ್ತಿದ್ದಾರೆ. ಪ್ರತಿ ಹೆಣ್ಣು ಮಕ್ಕಳು ವಿದ್ಯಾವಂತರಾಗಿ, ವೈಚಾರಿಕವಾಗಿ ಬೆಳೆಯಬೇಕು ಆಗ ಹೆಣ್ಣು ಸ್ವತಂತ್ರ್ಯವಾಗಿ ಸಬಲೆಯಾಗಬಲ್ಲಳು ಎಂದರು.
ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಜಿ.ಪದ್ಮಾವತಿ, ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಬಿ.ಎನ್.ದಿವ್ಯ, ಜಿಲ್ಲಾ ಮಾನಸಿಕ ತಜ್ಞ ಡಾ.ವಿನಯ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g